ಬಿರ್ಕಾಶಾ ದೇಶದ ರಾಜ ಸಭೆಗೆ ಲಾವಣ್ಯವತಿಯೂ ಬಹುಶೃತಳೂ ಆದ ಸ್ವರ್ಣಮಾಲಿನಿ ಎಂಬ ನರ್ತಕಿಯು ತನ್ನ ಚಾರಣ ವೃಂದದೊಂದಿಗೆ ಆಗಮಿಸಿದಳು. ರಾಜಕುಮಾರನ ಸಮಕ್ಷಮದಲ್ಲಿ ವೀಣಾಭೇರಿ ಮೃದಂಗಾದಿಗಳ ಗೋಷ್ಠಿಗಂಗೆಯಲ್ಲಿ ಲೀನವಾಗಿ, ಲಾಸ್ಯವೇ ತಾನೆಂಬಂತೆ ನರ್ತಿಸಿದಳು. ಸ್ವರ್ಣಮಾಲಿನಿ ಜ್ವಾಲಮಾಲೆಯಾಗಿ ಜ್ವಾಲೆಯ ನರ್ತನ, ನಕ್ಷತ್ರಾಕಾಶಗಳ ನರ್ತನ -- ಹೀಗೆ ಎಲ್ಲವನ್ನೂ ಚಿತ್ರಬಿಡಿಸಿದಂತೆ ಕಣ್ಣುಕಟ್ಟುವ ಹಾಗೆ ಚಿತ್ರಿಸಿದಳು.ತದನಂತರ ರಾಜಕುಮಾರನ ಬಳಿ ಬಂದು ತಲೆಬಾಗಿ ನಮಸ್ಕರಿಸಿದಳು. ರಾಜಕುಮಾರನು ಇಂತೆಂದನು " ನರ್ತನನಿಧಿಯೇ -- ಲಾಸ್ಯ ಲಾವಣ್ಯಗಳ ಪುತ್ರಿಯಂತಿರುವ ನಿನಗೆ ಈ ಕಲೆಯು ಹೇಗೆ ಒಲಿಯಿತು. ಎಲ್ಲಿಂದ ಅವತರಿಸಿತು? ಪಂಚಭೂತಗಳನ್ನೂ ನಿನ್ನ ಹಾವಭಾವಗಳಲ್ಲಿಯೇ ಹೇಗೆ ಅಡಕವಾಗಿಟ್ಟಿರುವೆ?" ಇದರ ಗುಟ್ಟೇನೆಂದು ಕೆಳಲಾಗಿ, ಸ್ವರ್ಣಮಾಲಿನಿಯು ಇಂತೆಂದಳು -- "ಮಹಾಸ್ವಾಮಿ, ನಿಮ್ಮ ಸವಾಲುಗಳಿಗೆ ನನ್ನ ಬಳಿ ಸಮಂಜಸ ಉತ್ತರಗಳು ಇಲ್ಲ. ಆದರೆ ನನಗೆ ತಿಳಿದಿರುವುದು ಇಷ್ಟೆ: ಒಬ್ಬ ದಾರ್ಶನಿಕನ ಆತ್ಮ ಹೇಗೆ ಶಿರೋಭಾಗದಲ್ಲಿ ಸ್ಥಿತವಾಗಿರುತ್ತದೆಯೋ, ಕಾವ್ಯಾತ್ಮನಾದ ಕವಿಯ ಆತ್ಮವು ಹ್ರುದ್ಭಾಗದಲ್ಲಿ ನೆಲೆಸಿರುತ್ತದೆಯೋ, ಗಾಯಕಮಾನ್ಯರ ಸರ್ವಸ್ವವೂ ಕಂಠದಲ್ಲಿ ಸ್ಥಾಪಿತವಾಗಿದೆಯೋ,ಹಾಗೆ ನರ್ತಕನ ಆತ್ಮವು ಅಣು ಅಣುವಿನಲ್ಲೂ ರಸಪ್ರವಾಹವಾಗಿ ಸಂಚರಿಸುತ್ತದೆ."
---
** ಭಾವಾನುವಾದ Adapted from Kahlil Gibran.
No comments:
Post a Comment